ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದಲ್ಲಿಯೇ ಉಳಿಸಿಕೊಂಡು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅಥವಾ ಪಕ್ಷದಿಂದ ಸ್ಪರ್ಧಿಸಲು ಇಚ್ಚಿಸುವ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಬೇಕೆಂಬುದು ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯ ಒಕ್ಕೊರಲ ನಿರ್ಣಯವಾಗಿದೆ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಜೆಡಿಎಸ್ ಪಕ್ಷದ ಅಸ್ಥಿತ್ವದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಟರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ 2019ರ ಲೋಕಸಭಾ ಚುನಾವಣೆ ಮತ್ತು 2023ರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದಿರುವ ಕಾರಣ,ಕ್ಷೇತ್ರವನ್ನು ಜೆಡಿಎಸ್ ಪಕ್ಷದಲ್ಲಿಯೇ ಉಳಿಸಿಕೊಂಡು,ಹೆಚ್.ಡಿ.ಕುಮಾರಸ್ವಾಮಿ,ಜೆಡಿಎಸ್ ಪಕ್ಷದ ಆಕಾಂಕ್ಷಿಗಳಿಗೆ ನೀಡಬೇಕೆಂಬ ಸಲಹೆಯನ್ನು ಪಕ್ಷದ ಮುಖಂಡರು ನೀಡಿದ್ದಾರೆ.ಮೈತ್ರಿ ವೇಳೆ ಬದಲಾದರೂ ಪಕ್ಷದ ತಿರ್ಮಾನಕ್ಕೆ ಬದ್ದರಾಗುವ ಭರವಸೆಯನ್ನು ಸಹ ಮುಖಂಡರು ಕಾರ್ಯಕರ್ತರು ನೀಡಿದ್ದಾರೆ ಎಂದರು.
ಜೆಡಿಎಸ್ ಚುನಾವಣೆಯಲ್ಲಿ ಕೇಸರಿ ಶಾಲು ಧರಿಸಿ ಚುನಾವಣಾ ಪ್ರಚಾರ ಮಾಡಲ್ಲ.ಮಂಡ್ಯದಲ್ಲಿ ನಡೆದ ಘಟನೆಗೆ ಸಂಬoಧಿಸಿದoತೆ ಅನಿವಾರ್ಯವಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದರು.ನಮ್ಮದು ಹಸಿರು ಶಾಲು.ಮೈತ್ರಿ ಮಾಡಿಕೊಂಡಿದ್ದರೂ ಪಕ್ಷದ ತತ್ವ, ಸಿದ್ದಾಂತಗಳನ್ನು ಬಿಡುವುದಿಲ್ಲ ಎಂದು ತಿಪ್ಪೇಸ್ವಾಮಿ ಸ್ಪಷ್ಟಪಡಿಸಿದರು.
ತುಮಕೂರು ಲೋಕಸಭಾ ಕ್ಷೇತ್ರದ ಜಿಲ್ಲಾ ಉಸ್ತುವಾರಿ ಶಾಸಕ ಸಿ.ಬಿ.ಸುರೇಶಬಾಬು ಮಾತನಾಡಿ,ಇಂದಿನ ಸಭೆಯ ತೀರ್ಮಾನದಂತೆ ಜೆಡಿಎಸ್ ಅಭ್ಯರ್ಥಿ ಇಲ್ಲವೇ, ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆಂಬುದು ಆಶಯವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಲೋಕಸಭಾ ಚುನಾವಣೆಯ ಉಸ್ತುವಾರಿ ಹೊತ್ತಿರುವ ಮಾಜಿ ಸಚಿವ ಗೋಪಾಲಯ್ಯ ಅವರೊಂದಿಗೆ ಕುಳಿತು ಚರ್ಚೆ ಮಾಡಿ,ವರಿಷ್ಠರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಲಾಗುವುದು. ನಮ್ಮಲ್ಲಿ ಮಾಜಿ ಶಾಸಕರಾದ ಡಿ.ನಾಗರಾಜಯ್ಯ,ತಿಪಟೂರಿನ ಶಾಂತಕುಮಾರ್,ಮಾಜಿ ಐಪಿಎಸ್ ಅಧಿಕಾರಿ ಜೋತಿ ಪ್ರಕಾಶ್ ಮಿರ್ಜಿ ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಒಂದು ವೇಳೆ ಪಕ್ಷ ತೀರ್ಮಾನಿಸಿದರೆ ನಾನು ಸಹ ಸ್ಪರ್ಧೆಗೆ ಸಿದ್ದನಿದ್ದೇನೆ ಎಂದು ಸುರೇಶಬಾಬು ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ ಎಸ್.ಆರ್.ಶ್ರೀನಿವಾಸ್ ಮತ್ತು ಚುನಾವಣೆ ನಂತರ ಡಿ.ಸಿ.ಗೌರಿಶಂಕರ್ ಅವರುಗಳು ಪಕ್ಷ ಬಿಟ್ಟಿದ್ದಾರೆ. ಆದರೆ ಕಾರ್ಯಕರ್ತರು ಪಕ್ಷ ತೊರೆದಿಲ್ಲ.ನಮ್ಮದು ಕಾರ್ಯಕರ್ತರ ಪಕ್ಷ. ಇಂತಹ ಹತ್ತಾರು ನಾಯಕರನ್ನು ಹುಟ್ಟು ಹಾಕುವ ಶಕ್ತಿ ಹೊಂದಿದ್ದಾರೆ.ಬಿಜೆಪಿಯಿoದ ಜೆ.ಸಿ.ಮಾಧುಸ್ವಾಮಿಗೆ ಟಿಕೇಟ್ ನೀಡದರೆ ಅವರ ಪರವಾಗಿ ಕೆಲಸ ಮಾಡುತ್ತೇನೆ.ಅದರಲ್ಲಿ ಯಾವುದೇ ಅನುಮಾನ ಬೇಡ.ಒಂದು ವೇಳೆ ಜೆಡಿಎಸ್ ಪಕ್ಷಕ್ಕೆ ಅವಕಾಶ ಸಿಕ್ಕರೆ ಮಾಧುಸ್ವಾಮಿ ಸಹ ನಮ್ಮ ಪರವಾಗಿ ಕೆಲಸ ಮಾಡಲಿದ್ದಾರೆ.ಮೈತ್ರಿ ಧರ್ಮ ಪಾಲಿಸುವುದು ಇಬ್ಬರಿಗು ಅನಿವಾರ್ಯ ಎಂದರು.
ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಕಸರತ್ತು

Leave a comment
Leave a comment