ತುಮಕೂರು: ಇತ್ತಿಚೆಗೆ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಡೆಸಿ ಅಟ್ರಾಸಿಟಿಯಿಂದ ತಪ್ಪಿಸಿಕೊಳ್ಳಲು ಸುಳ್ಳು ಜಾತಿ ಪ್ರಮಾಣಪತ್ರವನ್ನು ಸೃಷ್ಠಿಸುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಅಧಿಕಾರಿಗಳು ಇಂತಹ ನಕಲಿ ಜಾತಿ ಪ್ರಮಾಣಪತ್ರಗಳ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ಭೀಮ್ ಸೇನೆ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆಲಮಂಗಲದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಿರುವ ಕಾತ್ಯಾಯಿನಿ ಕೋಂ ಮಾದೇಶ್ ಎಂಬುವರು ತಿಗಳ ಜನಾಂಗಕ್ಕೆ ಸೇರಿದ್ದರೂ ಸಹ ನಕಲಿ ದಾಖಲೆ ಸೃಷ್ಟಿಸಿ ನಾಯಕ ಸಮುದಾಯಕ್ಕೆ ಸೇರಿರುವುದಾಗಿ ದಾಖಲೆಗಳನ್ನು ಸೃಷ್ಟಿಸಿ ಅಟ್ರಾಸಿಟಿಯಿಂದ ಪಾರಾಗಲು ಸಂಚು ರೂಪಿಸಿದ್ದಾರೆ.
ತುಮಕೂರು ಜಿಲ್ಲೆಯೂ ಇಂತಹ ಪ್ರಕರಣಗಳು ಅಲ್ಲಲ್ಲಿ ಬೆಳಕಿಗೆ ಬರುತ್ತಿದ್ದು ಅಧಿಕಾರಿಗಳು ದಲಿತರ ಮೇಲೆ ದೌರ್ಜನ್ಯ ನಡೆಸಿದವರ ರಕ್ಷಿಸಲು ನಕಲಿ ಜಾತಿ ಪ್ರಮಾಣ ಸೃಷ್ಠಿಗೆ ಸಹಕಾರ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ಇಂತಹ ಪ್ರಕರಣ ಮತ್ತೆ ಮರುಕಳಿಸಿದರೆ ಸಂಬoಧಪಟ್ಟ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸುವವರೆಗೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಅಟ್ರಾಸಿಟಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಟ್ರಾಸಿಟಿಯಿಂದ ತಪ್ಪಿಸಿಕೊಳ್ಳುವ ಬಲಿಷ್ಠ ಜಾತಿಗಳ ಹುನ್ನಾರದ ವಿರುದ್ಧ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಕರ್ನಾಟಕ ಭೀಮ್ ಸೇನೆ ಒಟ್ಟಾಗಿ ಹೋರಾಟ ನಡೆಸಲಿದ್ದು, ಎಲ್ಲ ಜಿಲ್ಲಾಧಿಕಾರಿಗಳಿಗೂ ಹಾಗೂ ತಾಲ್ಲೂಕು ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಗುವುದು ಎಂದರು.
ಸಭೆಯಲ್ಲಿ ಅಖಿಲಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾ ಉಪಾಧ್ಯಕ್ಷ ಇಂದ್ರಕುಮಾರ್ ಡಿ.ಕೆ, ಕರ್ನಾಟಕ ಭೀಮ್ ಸೇನೆ ಜಿಲ್ಲಾ ಉಪಾಧ್ಯಕ್ಷ ಎಸ್.ಆರ್.ರಮೇಶ್, ಜಿಲ್ಲಾ ಕಾರ್ಯಾಧ್ಯಕ್ಷ ಮಂಜುನಾಥ್, ಗುಬ್ಬಿ ತಾಲ್ಲೂಕು ಅಧ್ಯಕ್ಷ ವಿಜಯ್, ಮಾದೇಶ್, ಮಣಿಪ್ರಶಾಂತ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ ಸೇರಿದಂತೆ ಇತರರಿದ್ದರು.
ಅಟ್ರಾಸಿಟಿ ಪ್ರಕರಣದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ

Leave a comment
Leave a comment